ಏ.6 ರವರೆಗೆ ಕಾಲುವೆಗೆ ನೀರು,ಆತಂಕ ಪಡುವ ಅಗತ್ಯವಿಲ್ಲ ;ಆರ್ವಿಎನ್
ಸುರಪುರ ಟೈಮ್ಸ್ ವಾರ್ತೆ
ಸುರಪುರ : ಏಪ್ರಿಲ್ 6 ರವರೆಗೆ ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸಲಾಗುವುದು. ರೈತರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಬಾರಿ ಹಿಂಗಾರು ಹಂಗಾಮಿನಲ್ಲಿ ಹಲವು ಕಾರಣಗಳಿಂದ ನಾರಾಯಣಪುರ ಎಡದಂಡೆ ಕಾಲುವೆಯ ಅಚ್ಚುಕಟ್ಟು ಪ್ರದೇಶದ ರೈತರು ತಡವಾಗಿ ನಾಟಿ ಕಾರ್ಯ ಮಾಡಿದ್ದು. ಹೀಗಾಗಿ ಫಸಲು ಬರುವ ಸಮಯದಲ್ಲಿ ರೈತರಿಗೆ ನೀರಿನ ಕೊರತೆಯಾಗುವ ಆತಂಕ ಎದುರಾಗಿತ್ತು.
ಈ ಪರಿಸ್ಥಿತಿ ಕುರಿತು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ ಮತ್ತು ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್.ಬಿ.ತಿಮ್ಮಾಪುರ ಅವರ ಗಮನಕ್ಕೆ ತಂದಾಗ ತಕ್ಷಣವೇ ಅವರು ನಮ್ಮ ಮನವಿಗೆ ಸ್ಪಂದಿಸಿದರು. ರೈತರಿಗೆ ನೀರು ಒದಗಿಸುವ ನಿಟ್ಟಿನಲ್ಲಿ ತ್ವರಿತವಾಗಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲು ಆದೇಶಿಸಿದರು. ಅದರಂತೆ ಐಸಿಸಿ ಸಭೆ ನಡೆಸಿ ರೈತರ ಹಿತ ಕಾಯುವ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಏಪ್ರಿಲ್ ೧ ರಿಂದ ೬ ರವರೆಗೆ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ನೀರಿನ ಲಭ್ಯತೆ ಆಧಾರದ ಮೇಲೆ ಬೇಡಿಕೆಗೆ ಅನುಗುಣವಾಗಿ ನೀರು ಹರಿಸಲಾಗುವುದು. ನಾನು ಮತ್ತು ನಮ್ಮ ಸರಕಾರ ಯಾವತ್ತೂ ರೈತರ ಪರವಾಗಿದ್ದೇವೆ. ನಮ್ಮ ಕ್ಷೇತ್ರದ ರೈತರ ಪರವಾಗಿ ಸರಕಾರಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಕಾಲುವೆ ನೀರನ್ನು ರೈತರು ಸಮರ್ಪಕವಾಗಿ ಬಳಸಿಕೊಳ್ಳಬೇಕು ಯಾವುದೇ ಕಾರಣಕ್ಕೂ ನೀರು ಪೋಲಾಗದಂತೆ ನೋಡಿಕೊಳ್ಳಬೇಕು ಎಂದು ರೈತರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಅವರು ತಿಳಿಸಿದ್ದಾರೆ.

