ಫೆ. 8ರಂದು ಜಿಲ್ಲಾ ಮಟ್ಟದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ
ಸುರಪುರ ಟೈಮ್ಸ್ ವಾರ್ತೆ
ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾ ಮಟ್ಟದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಫೆ. 8ರಂದು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಂದು ಬೆಳಿಗ್ಗೆ 9.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಕ್ರೀಡಾಕೂಟಕ್ಕೆ ಎಸ್ಪಿ ಪೃಥ್ವಿಕ್ ಶಂಕರ್ ಅವರು ಚಾಲನೆ ನೀಡಲಿದ್ದಾರೆ.
ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅವರು ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಸಂಘದ ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಲಿಂಗೇರಿ ಮತ್ತು ರಾಜ್ಯ ಪರಿಷತ್ತು ಸದಸ್ಯ ಸಾಗರ್ ದೇಸಾಯಿ ಅವರು ಆಗಮಿಸಲಿದ್ದಾರೆ ಎಂದರು.
ಅಂದು ಸಂಜೆ 5ಕ್ಕೆ ನಡೆಯುವ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪೂರ ಮತ್ತು
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ ಹಾಗೂ ಜೆಡಿಎಸ್ ಯಾದಗಿರಿ ನಗರ ಘಟಕ ಅಧ್ಯಕ್ಷ ಬಂದಪ್ಪ ಅರಳಿ ಅವರು ಪ್ರಶಸ್ತಿ ಪಡೆದ ತಂಡಗಳಿಗೆ ಮತ್ತು ವಯುಕ್ತಿಕ ಸ್ಪರ್ಧೆಯಲ್ಲಿ ವಿಜೇತರಿಗೆ ನಗದು ಬಹುಮಾನ ಹಾಗೂ ಟ್ರೋಫಿ ವಿತರಣೆ ಮಾಡಲಿದ್ದಾರೆ ಎಂದು ಹೇಳಿದರು.
ಕ್ರೀಡೆಗಳ ವಿವರ : ಕಬಡ್ಡಿ, ವಾಲಿಬಾಲ್ ಮತ್ತು ಕ್ರಿಕೆಟ್ ನಲ್ಲಿ ವಿಜೇತ ತಂಡಗಳಿಗೆ ತಲಾ 5 ಸಾವಿರ ರೂಪಾಯಿ ನಗದು ಬಹುಮಾನ ಮತ್ತು ಟ್ರೋಫಿ ವಿತರಿಸಲಾಗುವುದು. ರನ್ನರ್ ಅಪ್ ತಂಡಗಳಿಗೆ ಮೆಡಲ್ ನೀಡಲಾಗುವುದು ಎಂದರು.
ಗುಂಡು ಎಸೆತ ಮತ್ತು ನೂರು ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ನಗದು ಬಹುಮಾನ ತಲಾ 1,000 ರೂಪಾಯಿ ಹಾಗೂ ಟ್ರೋಫಿ ನೀಡಲಾಗುವುದು. ಕೇರಂ ಮತ್ತು ಬ್ಯಾಡ್ಮಿಂಟನ್ ಸಿಂಗಲ್ ವಿಭಾಗ ಹಾಗೂ ಚೆಸ್ ನಲ್ಲಿ ವಿಜೇತರಿಗೆ ತಲಾ 500 ರೂಪಾಯಿ ನಗದು ಬಹುಮಾನ ಮತ್ತು ಟ್ರೋಫಿ ನೀಡಲಾಗುವುದು ಎಂದರು.
ಕೇರಂ ಮತ್ತು ಬ್ಯಾಡ್ಮಿಂಟನ್ ಡಬಲ್ ವಿಭಾಗದಲ್ಲಿ ವಿಜೇತ ತಂಡಕ್ಕೆ ತಲಾ 1,000 ರೂಪಾಯಿ ನಗದು ಬಹುಮಾನ ಮತ್ತು ಟ್ರೋಫಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.




